FASTNEWS
JUNE 26, 2024

ಬೆಂಗಳೂರು: ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಸುದ್ದಿ ವಾಹಿನಿ ಪವರ್ ಟಿವಿ ಕೂಡಲೇ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರ ಸ್ಥಗಿತಗೊಳಿಸಬೇಕೆಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಆದೇಶಿಸಿದೆ.
ಕೇಂದ್ರ ವಲಯದ ಐಜಿ ಬಿಆರ್ ರವಿಕಾಂತೇಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಎಚ್ಎಂ ರಮೇಶ್ ಗೌಡ ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿದ ನ್ಯಾಯಮೂರ್ತಿ ಎಸ್ಆರ್ ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠ, ಈ ಮಹತ್ವದ ಆದೇಶ ನೀಡಿದೆ.
ಅರ್ಜಿದಾರರ ಪರ ಹಾಜರಾದ ಹೈಕೋರ್ಟ್ ನ ಹಿರಿಯ ವಕೀಲ ಪ್ರಭುಲಿಂಗ ಕೆ ನಾವದಗಿ, ಸಂದೇಶ್ ಜೆ ಚೌಟ, ಡಿ ಆರ್ ರವಿಶಂಕರ್, “ಪ್ರತಿವಾದಿ ರಾಕೇಶ್ ಶೆಟ್ಟಿ ತನ್ನ ಟಿವಿ ಚಾನೆಲ್ ನಲ್ಲಿ ಅರ್ಜಿದಾರರ ವಿರುದ್ಧ ಮಾನಹಾನಿಕರ ಸುದ್ದಿಗಳನ್ನು ಬಿತ್ತರಿಸುತ್ತಿದ್ದಾರೆ. ರಾಕೇಶ್ ಶೆಟ್ಟಿ ಅವರು ತಮ್ಮ ಚಾನೆಲ್ ಅನ್ನು ಕಾನೂನುಬಾಹಿರವಾಗಿ ನಡೆಸುತ್ತಿದ್ದಾರೆ. 2021ರಿಂದಲೂ ಈ ಚಾನೆಲ್ ನ ಪರವಾನಗಿ ನವೀಕರಣವಾಗಿಲ್ಲ” ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.
ಕೇಬಲ್ ಟೆಲಿವಿಷನ್ ನೆಟ್ವರ್ಕ್ ಗಳ (ನಿಯಂತ್ರಣ) ಕಾಯಿದೆ – 1995ರ ಆದೇಶ ಉಲ್ಲಂಘಿಸಿರುವ ಕಾರಣ ತಕ್ಷಣದಿಂದಲೇ ತಮ್ಮ ಚಾನೆಲ್ನಲ್ಲಿ ಸುದ್ದಿಗಳೂ ಸೇರಿದಂತೆ ಯಾವುದೇ ಕಾರ್ಯಕ್ರಮಗಳನ್ನು ಜುಲೈ 8ರವರೆಗೆ ಪ್ರಸಾರ ಮಾಡಬಾರದು,” ಎಂದು ಕರ್ನಾಟಕ ಹೈಕೋರ್ಟ್ ಕಟ್ಟಪ್ಪಣೆ ನೀಡಿದೆ.