ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಘೋಷಣೆಗಳ ಬಗ್ಗೆ ವಿರೋಧ ಪಕ್ಷ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್ಪಿ) ಕಾನೂನು ಖಾತರಿ, ಕೃಷಿ ಸಾಲ ಮನ್ನಾ ಸೇರಿದಂತೆ ರೈತರ ಬೇಡಿಕೆಗಳ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಪೂರ್ಣ ಮೌನ ವಹಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ‘ಹಣಕಾಸು ಸಚಿವರು ತಮ್ಮ ಭಾಷಣವನ್ನು ಕೃಷಿಯಿಂದ ಪ್ರಾರಂಭಿಸಿದ್ದಾರೆ. ಆದರೆ, ರೈತರ ಬೇಡಿಕೆಗಳಾದ ಎಂಎಸ್ಪಿಗೆ ಕಾನೂನು ಖಾತರಿ, ಕೃಷಿ ಸಾಲ ಮನ್ನಾ, ಪಿಎಂ ಕಿಸಾನ್ ಪಾವತಿಗಳ ಹಣದುಬ್ಬರ ಸೂಚ್ಯಂಕ, ಪಿಎಂ ಫಸಲ್ ಭೀಮಾ ಯೋಜನೆಗೆ ಸುಧಾರಣೆಗಳು ಸೇರಿದಂತೆ ಸಂಸದೀಯ ಸ್ಥಾಯಿ ಸಮಿತಿಯ ಶಿಫಾರಸುಗಳ ಬಗ್ಗೆ ಸಂಪೂರ್ಣ ಮೌನ ವಹಿಸಿದ್ದಾರೆ’ ಎಂದು ಕಿಡಿಕಾರಿದ್ದಾರೆ.
Share