ಗದಗ : ಜಿಲ್ಲಾ ಪಂಚಾಯತ, ತೋಟಗಾರಿಕೆ ಇಲಾಖೆ, ಗದಗ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಇವರ ಸಹಯೋಗದಲ್ಲಿ ಗದಗ ನಗರದ ಕೆ.ಹೆಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದ ಹತ್ತಿರವಿರುವ ವಿ.ಡಿ.ಎಸ್.ಟಿ ಮೈದಾನದಲ್ಲಿ ಮಾರ್ಚ್ 01 ರಿಂದ ಮಾರ್ಚ್ 03ರವರೆಗೆ ಮೂರು ದಿನಗಳ ಕಾಲ ಫಲಪುಷ್ಪ ಪ್ರದರ್ಶನ ಹಾಗೂ ಜಿಲ್ಲಾ ಮಟ್ಟದ ಸರಸ್ ಮೇಳ ಹಮ್ಮಿಕೊಂಡಿದ್ದು ರೈತರು ಬೆಳೆದ ಹೂವು ಮತ್ತು ಹಣ್ಣುಗಳ ಪ್ರದರ್ಶನ ಹಾಗೂ ಗ್ರಾಮೀಣ ಪ್ರದೇಶದ ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ವಿವಿಧ ವಸ್ತುಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಗದಗ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಭರತ್.ಎಸ್.ರವರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು ಜಿಲ್ಲೆಯಲ್ಲಿ ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ವಸ್ತುಗಳಿಗೆ ಮಾರುಕಟ್ಟೆಯಲ್ಲಿ ಬೆಂಬಲ ನೀಡುವ ಉದ್ದೇಶದಿಂದ ಸರಸ್ ಮೇಳವನ್ನು ಆಯೋಜಿಸಲಾಗಿದ್ದು ಇದರ ಜೊತೆಗೆ ಫಲಪುಷ್ಪ ಪ್ರದರ್ಶನವೂ ಸಹಿತ ಒಂದೇ ಸೂರಿನಡಿ ವ್ಯವಸ್ಥೆಗೊಳಿಸಲಾಗಿರುತ್ತದೆ. ಸರಸ್ ಮೇಳಕ್ಕಾಗಿ 30 ಮಳಿಗೆಗಳನ್ನು ತೆರೆಯಲಾಗಿದ್ದು ಗದಗ ಜಿಲ್ಲೆಯ 20 ಹಾಗೂ ಬೇರೆ ಬೇರೆ ಜಿಲ್ಲೆಯ 10 ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿರುವ ವಸ್ತುಗಳ ಮಾರಾಟಕ್ಕೂ ವ್ಯವಸ್ಥೆ ಮಾಡಲಾಗಿದೆ.
ಮಾರ್ಚ್ 01 ರಂದು ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ಸರ್ಕಾರದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ॥ ಶರಣಪ್ರಕಾಶ ರುದ್ರಪ್ಪ ಪಾಟೀಲ, ಈ ಭಾಗದ ಸಂಸದರು, ವಿಧಾನ ಸಭೆ ಹಾಗೂ ವಿಧಾನ ಪರಿಷತ್ತಿನ ಸದಸ್ಯರು ಹಾಗೂ ವಿವಿಧ ಗಣ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಬೆಳಗ್ಗೆ 10 ಗಂಟೆಯಿಂದ ಸಂಜೆ 08 ಗಂಟೆಯವರೆಗೆ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದ್ದು, ಐಫೆಲ್ ಟವರ್, ಲಕ್ಕುಂಡಿಯ ಬ್ರಹ್ಮ ಜೀನಾಲಯ ಹಾಗೂ ಸಬರಮತಿ ಆಶ್ರಮದ ಪ್ರತಿಕೃತಿ ಹಾಗೂ ವಿವಿಧ ಬಗೆಯ ಹೂವುಗಳಿಂದ ಹಲವಾರು ರಚನೆಗಳನ್ನು ನಿರ್ಮಿಸಿ ಸಾರ್ವಜನಿಕರ ವೀಕ್ಷಣೆಗೆ ಅನುಕೂಲ ಕಲ್ಪಿಸಲಾಗಿದೆ. ಇದಲ್ಲದೇ, ಸ್ವ-ಸಹಾಯ ಗುಂಪಿನ ಮಹಿಳೆಯರು ಸಿದ್ದಪಡಿಸಿದ ಕಾಟನ್ ಸೀರೆಗಳು, ಸಿದ್ಧ ಉಡುಪುಗಳು, ಆಟಿಕೆ ಸಾಮಾನು ಇತ್ಯಾದಿಗಳ ವಸ್ತುಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಮಳಿಗೆಗಳಲ್ಲಿ ಗ್ರಾಮೀಣ ಸೊಗಡಿನ ತಿಂಡಿ-ತಿನಿಸುಗಳು ಸಹ ಲಭ್ಯವಿದ್ದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರೈತರು ಮತ್ತು ಮಹಿಳೆಯರನ್ನು ಪ್ರೋತ್ಸಾಹಿಸುವಂತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.